“ಸಿಸಿಬಿ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಸೆರೆ; 1 ಕೆಜಿ ಚಿನ್ನಾಭರಣ ವಶ.”
1 min read
ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 1 ಕೆ.ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಕಳ ತಾಲೂಕು ಮಾಳ ಮಲ್ಲಾರ್ನ ಗಣೇಶ ನಾಯ್ಕ(26)

ಮತ್ತು ವಿರಾಜಪೇಟೆಯ ಗುಯ್ಯ ಗ್ರಾಮದ ರಂಜಿತ್ ಕೆ.ಆರ್(26) ಬಂಧಿತ ಆರೋಪಿಗಳು.
ಆರೋಪಿಗಳಿಂದ ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ. 55 ಲಕ್ಷ ಆಗಬಹುದು. ಅಲ್ಲದೇ ಆರೋಪಿಗಳ ವಶದಿಂದ 2 ಮೊಬೈಲ್ ಫೋನ್ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 56,50,000 ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ವಿವರ:
ಜನವರಿ 15/2023 ರಂದು ಸಂಜೆ 6:30 ಗಂಟೆಯಿಂದ ಜನವರಿ 16ರ ಬೆಳಗ್ಗೆ 09:00 ಗಂಟೆಯ ಮಧ್ಯಾವಧಿಯಲ್ಲಿ ಮಂಗಳೂರು ತಾಲ್ಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.
ಈ ಕ್ಷಿಷ್ಟಕರವಾದ ಹಾಗೂ ಯಾವುದೇ ಸುಳಿವು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿ ಈ ಪ್ರಕರಣದಲ್ಲಿ ಭಾಗಿಯಾದ ಗಣೇಶ್ ನಾಯ್ಕ ಮತ್ತು ರಂಜತ್ ಕೆ.ಆರ್. ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಗಣೇಶ್ ನಾಯ್ಕ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯೊಂದರ ಬಾಗಿಲಿನ ಬೀಗವನ್ನು ಒಡೆದು ಮನೆಯಲ್ಲಿನ ಬೆಲೆಬಾಳುವ ಸೊತ್ತುಗಳನ್ನು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವುಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣವು ಕೂಡಾ ಪತ್ತೆಯಾಗಿರುತ್ತದೆ. ಆರೋಪಿ ಗಣೇಶ್ ನಾಯ್ಕ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ,ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐಯವರಾದ ಶಶಿಧರ ಶೆಟ್ಟಿ, ಹರೀಶ್,ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








