लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಾಡಾನೆ ಸೆರೆ ಕಾರ್ಯ ತಾತ್ಕಾಲಿಕ ಸ್ಥಗಿತ : ತವರೂರು ಸೇರಿದ ಸಾಕಾನೆಗಳು.”

1 min read

ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಸೆರೆಗೆ ಕಳೆದ 25 ದಿನಗಳಿಂದ ಪ್ರಾರಂಭವಾಗಿದ್ದ ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಸಾಕಾನೆಗಳ ಶಿಬಿರ ಪ್ರಾರಂಭಿಸಿ ಅಲ್ಲಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಒಟ್ಟು 6 ಸಾಕಾನೆಗಳು, ಮಾವುತರು, ಅರವಳಿಕೆ ತಜ್ಞರು, ಅರಣ್ಯ ಸಿಬ್ಬಂದಿ, ಆನೆ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

ನವೆಂಬರ್ 21 ರಂದು ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿತ್ತು.ಈ ಘಟನೆಯ ನಂತರ ಈ ಭಾಗದ ಮೂರು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಲು ಆದೇಶವಾಗಿತ್ತು. ಡಿಸೆಂಬರ್ 2ರಂದು ಕಾರ್ಯಾಚರಣೆ ವೇಳೆ ಅರವಳಿಕೆ ಚುಚ್ಚುಮದ್ದು ಹಾಕಿದ್ದ ಒಂಟಿಕೊಂಬಿನ ಕಾಡಾನೆಯೊಂದು ಬಿದ್ದು ದುರ್ಮರಣ ಹೊಂದಿತ್ತು. ಆ ನಂತರ ಸಕಲೇಶಪುರ ಸಮೀಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ದಸರಾ ಆನೆ ಅರ್ಜುನ ಕಾಡಾನೆ ದಾಳಿಯಿಂದ ಸಾವನ್ನಪ್ಪಿತ್ತು.ಈ ಸಂದರ್ಭದಲ್ಲಿ ಕೆಲ ದಿನಗಳ ಮಟ್ಟಿಗೆ ಮೂಡಿಗೆರೆ ತಾಲ್ಲೂಕಿನ ವ್ಯಾಪ್ತಿಯ ಕಾಡಾನೆ ಸೆರೆ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮತ್ತೆ ಪುನಃ ಈಗ್ಗೆ ವಾರದ ಹಿಂದೆ ಪುನಃ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು.

ಇದೀಗ ಮತ್ತೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಅವರು ಪತ್ರಿಕೆಗೆ ಮಾಹಿತಿ ನೀಡಿದ್ದು ; ವಾರದಿಂದ ಊರುಬಗೆ ಭಾಗದದಲ್ಲಿ ಎರಡು ಕಾಡಾನೆಗಳಿಗಾಗಿ ಹುಡುಕಾಟ ನಡೆಸಿದ್ದು,ಅವು ಪತ್ತೆಯಾಗಿಲ್ಲ. ಜೊತೆಗೆ ಕಾರ್ಯಾಚರಣೆಗೆ ಇನ್ನೂ ಎರಡು ಹೆಚ್ಚುವರಿ ಆನೆಗಳ ಅವಶ್ಯಕತೆಯಿದ್ದು, ಅದಕ್ಕಾಗಿ ಬೇಡಿಕೆ ಇಟ್ಟಿದ್ದೇವೆ. ಕೆಲವು ಆನೆಗಳು ಅನಾರೋಗ್ಯದಿಂದ ಬಳಲುತ್ತಿದ್ದು, ಮಾವುತರು ಸಹ ಸತತ ಒಂದು ತಿಂಗಳಿಂದ ಇಲ್ಲಿ ಇರುವುದರಿಂದ ಅವರಿಗೂ ವಿಶ್ರಾಂತಿಯ ಅವಶ್ಯಕತೆ ಇರುವುದರಿಂದ ಕೆಲವು ದಿನಗಳ ಮಟ್ಟಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ಎಂಟತ್ತು ದಿನಗಳಲ್ಲಿ ಮತ್ತೆ ಕಾರ್ಯಾಚರಣೆ ಪ್ರಾರಂಭಿಸಲಿದ್ದು, ಕಾಡಾನೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡಬೇಕು ಎಂದು ಕೋರಿದ್ದಾರೆ.

ಈ ನಡುವೆ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಬಗ್ಗೆ ಸ್ಥಳೀಯರು ನಿರಾಸೆ ವ್ಯಕ್ತಪಡಿಸಿದ್ದಾರೆ. ಆದಷ್ಟು ಬೇಗ ಮತ್ತೆ ಕಾರ್ಯಾಚರಣೆ ಪ್ರಾರಂಭಿಸಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಹಿಡಿದು ಸಾಗಿಸಬೇಕು ಎಂದು ಒತ್ತಾಯಿಸಿದ್ದಾರೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *