ಅಂಧಮಕ್ಕಳ ಪಾಠಶಾಲೆಗೆ ಅನುದಾನ ನೀಡಲು ಶ್ರಮಿಸುತ್ತೇನೆ : ಟಿ.ಡಿ. ರಾಜೇಗೌಡ
1 min read
ಅಂಧಮಕ್ಕಳ ಪಾಠಶಾಲೆಗೆ ಅನುದಾನ ನೀಡಲು ಶ್ರಮಿಸುತ್ತೇನೆ : ಟಿ.ಡಿ. ರಾಜೇಗೌಡ
ಚಿಕ್ಕಮಗಳೂರು: ಅಂಧಮಕ್ಕಳ ಪಾಠಶಾಲೆ 1996 ರಲ್ಲಿ ಆರಂಭಗೊಂಡಿದ್ದು, ಈ ಶಾಲೆಯಲ್ಲಿ ವ್ಯಾಸಂಗ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶೃಂಗೇರಿ ಶಾಸಕ ಹಾಗೂ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಡಿ. ರಾಜೇಗೌಡ ತಿಳಿಸಿದರು.
ಅವರು ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿಯವರಿಗೆ ಗೌರವ ಸಮರ್ಪಣಾ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಂಧಮಕ್ಕಳ ವಸತಿಯುತ ಪಾಠಶಾಲೆಯಲ್ಲಿ ಉಚಿತ ಊಟ, ವಸತಿ, ಶಿಕ್ಷಣ, ವೈದ್ಯಕೀಯ ಸೇವೆ, ಸಮವಸ್ತ್ರ, ಶಿಕ್ಷಣ ಸಾಮಾಗ್ರಿಗಳನ್ನು ಉಚಿತವಾಗಿ ಪಡೆದು ಹಲವು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆಯ ಅಧ್ಯಕ್ಷರು ನೀಡಿರುವ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಮಟ್ಟದಲ್ಲಿ ತಾವು ಮತ್ತು ಶಾಸಕ ಹೆಚ್.ಡಿ ತಮ್ಮಯ್ಯ, ಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತೆ ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ಮತ್ತು ಶಿಕ್ಷಣ ಸಚಿವರನ್ನು ಭೇಟಿಮಾಡಿ ಸೌಲಭ್ಯ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ತಾವು ಜಿ.ಪಂ ಅಧ್ಯಕ್ಷರಾಗಿದ್ದಾಗ ಬರುತ್ತಿದ್ದ ಟಿಎ, ಡಿಎಯನ್ನು ಈ ಶಾಲೆಗೆ ನೀಡುತ್ತಿದ್ದೇನೆ. ಮುಂದೆ ವೈಯಕ್ತಿಕವಾಗಿ 1 ಲಕ್ಷ ರೂ ದೇಣಿಗೆ ನೀಡುವ
ಜೊತೆಗೆ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದಿಂದ 10 ಲಕ್ಷ ರೂ ನೀಡುವುದಾಗಿ ಭರವಸೆ ನೀಡಿದ ಅವರು, ಈ ರೀತಿ ದೇವರ ಕೆಲಸ ಮಾಡುತ್ತಿರುವ ಡಾ. ಜೆ.ಪಿ ಕೃಷ್ಣಗೌಡ ಮತ್ತು ಅವರ ತಂಡಕ್ಕೆ ಶುಭ ಹಾರೈಸಿದರು”
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ, ಆಶಾಕಿರಣ ಅಂಧಮಕ್ಕಳ ಶಾಲೆಯ ಅಧ್ಯಕ್ಷರು ನೀಡಿರುವ ವಿವಿಧ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಶಾಲೆಯನ್ನು ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೇರಿಸಿದ್ದ ಪರಿಣಾಮ ಸೌಲಭ್ಯಗಳಿಂದ ವಂಚಿತವಾಗಿದೆ. ಶಾಲಾ ಶಿಕ್ಷಣ ಇಲಾಖೆಗೆ ಸೇರಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದರ ಜೊತೆಗೆ ಈ ಶಾಲೆಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಕರ್ಯಗಳನ್ನು ಕೊಡಿಸುವಲ್ಲಿ ಶ್ರಮಿಸುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು.
ಡಾ. ಜೆ.ಪಿ. ಕೃಷ್ಣಗೌಡರ ಪುತ್ರಿ ವರ್ಷ ತಂದೆಯ ಕಾರ್ಯಗಳನ್ನು ಮುಂದುವರೆಸಿಕೊಂಡು ಹೊಗುತ್ತಿರುವುದು ಶ್ಲಾಘನಿಯ ಎಂದರು.
ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ಹಿಂದೆ ಎಸ್.ಎಂ. ಕೃಷ್ಣ ನೇತೃತ್ವದ ಸರ್ಕಾರದಲ್ಲಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾಗಿದ್ದಾಗ ನಡೆದ ನೆನಪುಗಳನ್ನು ಸ್ಥರಿಸಿಕೊಂಡ ಅವರು, ರಾಜ್ಯದಲ್ಲಿ 1.70 ಲಕ್ಷ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳನ್ನು ರಚನೆ ಮಾಡಿ 200 ಕೋಟಿ ರೂ ಅನುದಾನ ಮೀಸಲಿಟ್ಟು ಪ್ರೀತಿ ಕೊಡುವ ಮೂಲಕ ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿರಿಸುವುದಾಗಿ ತಿಳಿಸಿದರು.
ಅರ್ಚನೆ, ಅಭಿಷೇಕ ದೇವರಿಗೆ ಮಾಡುತ್ತೇವೆ. ಅದೇ ರೀತಿ ಅನಾಥ, ಅಂಗವಿಕಲ, ವೃದ್ಧರ ಸೇವೆ ಮಾಡುವುದು ಅದಕ್ಕಿಂತ ಹೆಚ್ಚು ಶ್ರೇಷ್ಠ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಅಧ್ಯಕ್ಷರು ಹಾಗೂ ಖ್ಯಾತ ಮಕ್ಕಳ ತಜ್ಞ ಡಾ. ಜೆ.ಪಿ. ಕೃಷ್ಣಗೌಡ ಮಾತನಾಡಿ, ಇದೊಂದು ಅಭೂತಪೂರ್ವ ಸಮಾರಂಭ, ಈ ಶಾಲೆಯ ಶಿಕ್ಷಕರಿಗೆ ವಸತಿ ಇರಲಿಲ್ಲ, ಟ್ರಸ್ಟ್ನಿಂದ ಕಾವೇರಿ ವಸತಿ ಗೃಹವನ್ನು ಆದಿಚುಂಚನಗಿರಿ ಶೃಂಗೇರಿ ಶಾಖಾಮಕದ ಗುಣನಾಥ ಶ್ರೀಗಳು ಉದ್ಘಾಟನೆ ಮಾಡಿದ್ದಾರೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಡಾ. ಹರ್ಷ. ಮಹೇಶ್, ಶಶಿಪ್ರಸಾದ್, ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಸುರೇಶ್, ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ, ಮುಖ್ಯ ಶಿಕ್ಷಕ ಲಕ್ಷ್ಮಣ್ ಗೌಡ, ಆಶ್ರಯ ಫೌಂಡೇಷನ್ ಅಧ್ಯಕ್ಷ ವಿ.ಪಿ. ಸಾಗರ್ .ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿಶ್ರೀನಿವಾಸ್, ಮತ್ತಿತರು ಹಾಜರಿದ್ದರು.