“ಕಾಡುಕೋಣದ ಅಟ್ಟಹಾಸಕ್ಕೆ ಮಹಿಳೆಯ ಬಲಿ.”
1 min read
ಚಿಕ್ಕಮಗಳೂರು : ಜಿಲ್ಲೆಯ,ಮಲೆನಾಡಿನ ಕಾಡಂಚಿನ ಗ್ರಾಮದಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ವಲಯದ ಬಿಳಗಲಿ ಗ್ರಾಮದ ಬಳಿ ಕಾಡುಕೋಣವೊಂದು ನಡೆಸಿದ ದಾಳಿಗೆ ಶೀಲಾ (52) ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಿತ್ಯದಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಎದುರಾದ ಕಾಡುಕೋಣ ಇವರ ಮೇಲೆರಗಿದೆ.ಪ್ರತ್ಯಕ್ಷದರ್ಶಿಗಳ ಪ್ರಕಾರ, ತೋಟದಲ್ಲಿ ಶೀಲಾ ಅವರು ಕೆಲಸದಲ್ಲಿ ಮಗ್ನರಾಗಿದ್ದಾಗ ಏಕಾಏಕಿ ಬಂದ ಕಾಡುಕೋಣ ಅತಿ ಕ್ರೂರವಾಗಿ ದಾಳಿ ನಡೆಸಿದೆ.
ಕೋಣದ ಕೊಂಬುಗಳು ಮಹಿಳೆಯ ಕುತ್ತಿಗೆ ಮತ್ತು ಹೊಟ್ಟೆಯ ಭಾಗಕ್ಕೆ ಬಲವಾಗಿ ಚುಚ್ಚಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ದಾಳಿಯ ರಭಸಕ್ಕೆ ದೇಹದಿಂದ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಉಂಟಾಗಿದೆ.
ಸಾಂದರ್ಭಿಕ ಚಿತ್ರಗಳು.
ಇದನ್ನು ಗಮನಿಸಿದ ತೋಟದ ಇತರ ಕಾರ್ಮಿಕರು ಹಾಗೂ ಸ್ಥಳೀಯರು ತಕ್ಷಣವೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ, ಗಾಯಗಳ ತೀವ್ರತೆ ಹೆಚ್ಚಾಗಿದ್ದ ರಿಂದ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯು ಸ್ಥಳೀಯ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕವನ್ನು ಸೃಷ್ಟಿಸಿದೆ. ಕಾಡಂಚಿನ ತೋಟಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ.

ಸಾಂದರ್ಭಿಕ ಚಿತ್ರಗಳು.

ಸದ್ಯ ಈ ದಾರುಣ ಘಟನೆಗೆ ಸಂಬಂಧಿಸಿದಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ..
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ಬ್ಯೂರೋ ನ್ಯೂಸ್,ಅವಿನ್ ಟಿವಿ.

