“ನೀಟ್ ಅಕ್ರಮ ಖಂಡಿಸಿ ವುಮನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ.”
1 min read
ಆಲ್ದೂರು:ನೀಟ್ ಹಾಗೂ ವಿವಿಧ ಸ್ಪರ್ಧಾತ್ಮಕ ನೇಮಕಾತಿ ಪರೀಕ್ಷೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳನ್ನು ಖಂಡಿಸಿ ವುಮನ್ ಇಂಡಿಯಾ ಮೂವ್ಮೆಂಟ್ (WIM) ವತಿಯಿಂದ ಮಂಗಳವಾರ ಆಲ್ದೂರಿನ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಗೆ ಚಾಲನೆ ನೀಡಿದ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ಆಶಾ ಸಂತೋಷ್ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಎಂಬುದು ಕೇವಲ ಆರ್ಥಿಕ ಅಂಕಿ-ಅಂಶಗಳಿಂದ ಮಾತ್ರ ಅಳೆಯುವ ವಿಷಯವಲ್ಲ; ಪ್ರಜೆಗಳ ಅಭಿವ್ಯಕ್ತಿ ಮತ್ತು ವಿಚಾರ ವಿನಿಮಯದ ಸ್ವಾತಂತ್ರ್ಯದಲ್ಲಿಯೂ ಅದು ಅಡಕವಾಗಿದೆ ಎಂದು ಅವರು ಹೇಳಿದರು. ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಬಲವಂತವಾಗಿ ಹತ್ತಿಕ್ಕುವ ಪ್ರಯತ್ನಗಳು ಖಂಡನೀಯವಾಗಿದ್ದು, ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ನೀಟ್ ಅಕ್ರಮ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿದ್ಯಾರ್ಥಿಗಳಾದ ನೇಹಾ ಬೋರಾ, ಮನೀಶ್, ಅಮೀನ್ ಹಾಗೂ ಅಭಿಜಿತ್ ದೀಕ್ಷೆ ಸೇರಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ನಡೆಸಿರುವುದು ಖಂಡನೀಯವಾಗಿದೆ. ಸರ್ಕಾರ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ, ಅವರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವುಮನ್ ಇಂಡಿಯಾ ಮೂವ್ಮೆಂಟ್ನ ಪದಾಧಿಕಾರಿಗಳಾದ ಸವಿತಾ,ನಜರತ್ ಬಾನು,ಶಬಾನಾ, ಸಿಮ್ರನ್,ಶಫಿಯಾ ಸೇರಿದಂತೆ ಎಸ್.ಡಿ.ಪಿ.ಐ ಮತ್ತು ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

