ನಿರಂತರ ನೀರು ಯೋಜನೆಗೆ ಸಂಪೂರ್ಣ ನೆರವು: ಸಚಿವ ಬಸವರಾಜ್ ಭರವಸೆ #avintvcom
1 min read
ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ
ನಿರಂತರ ನೀರು ಯೋಜನೆಗೆ ಸಂಪೂರ್ಣ ನೆರವು: ಸಚಿವ ಬಸವರಾಜ್ ಭರವಸೆ
ಬೆಳಗಾವಿ, ಜ.8(ಕರ್ನಾಟಕ ವಾರ್ತೆ): ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರಂತರ ನೀರು ಯೋಜನೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗುವುದು.
ಯೋಜನೆಯ ತುರ್ತು ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲ ನೆರವು ಸರ್ಕಾರ ನೀಡಲಿದೆ ಎಂದು ಸಚಿವ ಬಸವರಾಜ್ ಭರವಸೆಯನ್ನು ನೀಡಿದರು.
ಆರ್.ಎಫ್.ಐ.ಡಿ. ಟ್ಯಾಗ್ ವೈಫಲ್ಯ-ವರದಿ ಸಲ್ಲಿಸಲು ಸೂಚನೆ:
ಕಸ ಸಂಗ್ರಹಣೆಗೆ ಸಂಬಂಧಿಸಿದಂತೆ ನಗರದಲ್ಲಿ ಅಳವಡಿಸಲಾಗಿರುವ ಆರ್.ಎಫ್.ಐ.ಡಿ. ಟ್ಯಾಗ್ ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಸವರಾಜ್ ಎಚ್ಚರಿಕೆ ನೀಡಿದರು.
ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರ ಸ್ವಚ್ಛವಾಗಿಡಬೇಕಾದರೆ ಕಸ ವಿಲೇವಾರಿ ವ್ಯವಸ್ಥೆ ಸಮರ್ಪಕವಾಗಿ ಇರಬೇಕು. ನಿಯಮಾವಳಿ ಉಲ್ಲಂಘಿಸಿ ಕಸ ಚೆಲ್ಲುವವರ ವಿರುದ್ಧ ದಂಡದ ಜತೆಗೆ ಪ್ರಕರಣ ದಾಖಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಸ್ತಿ ತೆರಿಗೆ ಸಂಗ್ರಹಕ್ಕೆ ಕಟ್ಟುನಿಟ್ಟಿನ ಸೂಚನೆ:
ನಿಗದಿಪಡಿಸಲಾಗಿರುವ ಆಸ್ತಿ ತೆರಿಗೆಯನ್ನು ಮಾರ್ಚ್ ಅಂತ್ಯದೊಳಗೆ ಶೇ.100 ರಷ್ಟು ಕಡ್ಡಾಯವಾಗಿ ಸಂಗ್ರಹಿಸಬೇಕು ಎಂದು ಸಚಿವ ಬಸವರಾಜ್ ಸೂಚನೆ ನೀಡಿದರು.
ಆಸ್ತಿ ತೆರಿಗೆಯಿಂದ ಸಾರ್ವಜನಿಕರಿಗೆ ಹೆಚ್ಚಿನ ಸೌಕರ್ಯಗಳನ್ನು ಒದಗಿಸುವುದು ಸಾಧ್ಯ. ಆದ್ದರಿಂದ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ನಿರ್ಲಕ್ಷ್ಯ ತೋರಬಾರದು ಎಂದರು.
ಬಾಕಿ ತೆರಿಗೆಯನ್ನು ಮಾಸಾಂತ್ಯದಲ್ಲಿ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.