ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹ ನಿರ್ಮಾಣ: ಲಕ್ಷ್ಮಣ ಸವದಿ #avintvcom
1 min read
ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹ ನಿರ್ಮಾಣ: ಲಕ್ಷ್ಮಣ ಸವದಿ
ಬೆಳಗಾವಿ 08 (ಕರ್ನಾಟಕ ವಾರ್ತೆ): ಚಾಲಕರು, ನಿರ್ವಾಹಕರ ವಿಶ್ರಾಂತಿಗೆ ಅನುಕೂಲವಾಗುವಂತೆ ಹಂತ ಹಂತವಾಗಿ ಇತರೆ ಎಲ್ಲ ಸಾರಿಗೆ ಘಟಕಗಳಲ್ಲಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದರು.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದ ಘಟಕ 3 ರಲ್ಲಿ ನೂತನವಾಗಿ ನಿರ್ಮಿಸಿದ ಮಹಿಳಾ ಮತ್ತು ಪುರಷರ ಸಿಬ್ಬಂದಿಗಳ ವಿಶ್ರಾಂತಿ ಗೃಹಗಳು ಹಾಗೂ ಶುದ್ದ ಕುಡಿಯುವ ನೀರಿನ ಘಟಕವನ್ನು ಶುಕ್ರವಾರ(8) ಉದ್ಘಾಟಿಸಿದ ಬಳಿಕ ಅವರು ಮಾಧ್ಯಮದವರ ಜತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಕರ್ತವ್ಯದ ಮೇರೆಗೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ಚಾಲಕರು ಹಾಗೂ ನಿರ್ವಾಹಕರುಗಳಿಗೆ ವಸತಿಗೆ ಬಹಳ ತೊಂದರೆ ಆಗುತ್ತಿದ್ದು, ಇದನ್ನು ಗಮನಿಸಿ ಮಹಿಳಾ ಹಾಗೂ ಪುರುಷರಿಗಾಗಿ ಪ್ರತ್ಯೇಕ ಎರಡು ವಿಶ್ರಾಂತಿ ಗೃಹ ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು
ನೌಕರರ ಬೇಡಿಕೆ ಶೀಘ್ರ ಈಡೇರಿಕೆ ಭರವಸೆ:
ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಒಟ್ಟು 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಕೊಡಲಾಗಿದೆ. ಆರನೇ ವೇತನ ಆಯೋಗಕ್ಕಾಗಿ ಸಮಿತಿಯನ್ನು ರಚಿಸಲಾಗಿದ್ದು, ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಮಿತಿಯು ಕಾರ್ಯಾರಂಭಿಸಿದೆ ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.
ವಿದ್ಯಾರ್ಥಿಗಳ ಪಾಸ್ ವಿತರಣೆ ಆರಂಭ:
ಶಾಲಾ -ಕಾಲೇಜುಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಕಾರ್ಯ ಪ್ರಾರಂಭವಾಗಿದೆ. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಯಾವುದೇ ರೀತಿ ತೊಂದರೆ ಆಗದಂತೆ ಅವರನ್ನು ಶಾಲಾ -ಕಾಲೇಜುಗಳಿಗೆ ತಲುಪಿಸುವ ಜವಾಬ್ದಾರಿ ನಮ್ಮದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.