“ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಅವ್ಯವಸ್ಥೆ ಆರೋಪ : ಅಧಿಕಾರಿಗಳ ವಿರುದ್ಧ ಕರವೇ ಸ್ವಾಭಿಮಾನಿ ಬಣ ಆಕ್ರೋಶ.”
1 min read
ಕುಶಾಲನಗರ : ಕೊಡಗು ಜಿಲ್ಲೆಯ ಕುಶಾಲನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ತೀವ್ರ ಅವ್ಯವಸ್ಥೆ ಕಂಡುಬಂದಿದ್ದು, ಮಹಿಳೆಯರ ಸುರಕ್ಷತೆ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ ಎಂದು ಕರವೇ ಸ್ವಾಭಿಮಾನಿ ಬಣ ಆರೋಪಿಸಿದೆ.

ಕಾರಣಾಂತರಗಳಿಂದ ಕುಶಾಲನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ತೆರಳಿದ್ದ ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳ ಬಳಿ ಸಾರ್ವಜನಿಕ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ದುರ್ವಾಸನೆ ಬೀರುತ್ತಿದ್ದು, ಒಳಗೆ ತೆರಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಮಹಿಳಾ ಅಧ್ಯಕ್ಷೆ ಜಯಶ್ರೀ ಮುರುಗೇಶ್ ಹಾಗೂ ಶುಂಟಿಕೊಪ್ಪ ಹೋಬಳಿ ಅಧ್ಯಕ್ಷೆ ಭವ್ಯ ಅವರು ವಿಶ್ರಾಂತಿ ಕೊಠಡಿಗೆ ತೆರಳಿ ಪರಿಶೀಲಿಸಿದಾಗ,ಮದ್ಯಪಾನ ಮಾಡಿರುವ ಕುರುಹುಗಳು,ಮಹಿಳೆಯರ ಬಟ್ಟೆಗಳು ಹಾಗೂ ಪ್ಯಾಂಟ್ಗಳು ಸೇರಿದಂತೆ ವಿವಿಧ ಕಸದ ವಸ್ತುಗಳು ಕಂಡುಬಂದಿವೆ ಎಂದು ಸಂಘಟನೆ ತಿಳಿಸಿದೆ.

ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಇಂತಹ ವಸ್ತುಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ,ಮಹಿಳೆಯರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರವೇ ಸ್ವಾಭಿಮಾನಿ ಬಣ ಆಗ್ರಹಿಸಿದೆ.
ಮಕ್ಕಳಿಗೆ ತೊಟ್ಟಿಲಿನ ವ್ಯವಸ್ಥೆಯೂ ಇಲ್ಲ.
ಇತರೆ ಹಲವು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಗಳಲ್ಲಿ ಸಣ್ಣ ಮಕ್ಕಳೊಂದಿಗೆ ಬರುವ ತಾಯಂದಿರ ಅನುಕೂಲಕ್ಕಾಗಿ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ತೊಟ್ಟಿಲಿನ ವ್ಯವಸ್ಥೆ ಕಲ್ಪಿಸಲಾಗಿದೆ.ಆದರೆ ಪ್ರಮುಖ ಪ್ರವಾಸಿ ಕೇಂದ್ರವಾಗಿರುವ ಕುಶಾಲನಗರದ ಬಸ್ ನಿಲ್ದಾಣದಲ್ಲಿ ಇಂತಹ ಮೂಲಭೂತ ಸೌಲಭ್ಯವೂ ಇಲ್ಲ ಎಂದು ಸಂಘಟನೆ ಆರೋಪಿಸಿದೆ.
ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮರ್ಪಕವಾಗಿ ಸ್ಪಂದಿಸುವ ಬದಲು ಅಧಿಕಾರಿಗಳು ಕರವೇ ಸ್ವಾಭಿಮಾನಿ ಬಣದ ಪದಾಧಿಕಾರಿಗಳೊಂದಿಗೆ ಉಡಾಫೆಯಿಂದ ವರ್ತಿಸಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.
ವಿಷಯ ತಿಳಿದ ಬಳಿಕ ಸಂಘಟನೆಯ ಪದಾಧಿಕಾರಿಗಳು ಸ್ಥಳದಲ್ಲಿದ್ದ ಬಸ್ ನಿಲ್ದಾಣದ ಟ್ರಾಫಿಕ್ ಕಂಟ್ರೋಲರ್ (ಟಿ.ಸಿ) ಅವರನ್ನು ಕರೆಸಿ ಅವ್ಯವಸ್ಥೆಯ ಕುರಿತು ಪ್ರಶ್ನಿಸಿದ್ದಾರೆ.ಈ ವೇಳೆ ಸಮಸ್ಯೆ ಬಗೆಹರಿಸುವ ಬದಲು ಸಂಘಟನೆಯ ವಿರುದ್ಧ ಪೊಲೀಸ್ ದೂರು ನೀಡುವುದಾಗಿ ಟಿ.ಸಿ.ಧಮಕಿ ಹಾಕಿದ್ದಾರೆ ಎಂದು ಕರವೇ ಸ್ವಾಭಿಮಾನಿ ಬಣ ಆರೋಪಿಸಿದೆ.
ಮಹಿಳೆಯರ ಸುರಕ್ಷತೆಗೆ ಕ್ರಮಕ್ಕೆ ಆಗ್ರಹ.
ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯಪಾನದ ಕುರುಹುಗಳು ಹಾಗೂ ಬಟ್ಟೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆಯೇ ಎಂಬ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಮಕ್ಕಳನ್ನು ಕರೆದುಕೊಂಡು ಬರುವ ತಾಯಂದಿರು ಹಾಲುಣಿಸಲು ಹಾಗೂ ವಿಶ್ರಾಂತಿ ಪಡೆಯಲು ಅವಲಂಬಿಸುವ ಸ್ಥಳದಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡಬೇಕು.ದುರ್ವಾಸನೆ ಮತ್ತು ಗಲೀಜು ವಾತಾವರಣದಿಂದ ಮಹಿಳೆಯರು ಹಾಗೂ ಮಕ್ಕಳು ತೊಂದರೆ ಅನುಭವಿಸುವಂತಾಗಬಾರದು ಎಂದು ಕರವೇ ಸ್ವಾಭಿಮಾನಿ ಬಣ ತಿಳಿಸಿದೆ.
ಕೆ.ಎಸ್.ಆರ್.ಟಿ.ಸಿ.ಯ ಉನ್ನತ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ಸಂಪೂರ್ಣ ಸ್ವಚ್ಛಗೊಳಿಸಿ,ಮಹಿಳೆಯರಿಗೆ ಅನುಕೂಲಕರ ವಾತಾವರಣ ಕಲ್ಪಿಸಬೇಕು.ಜೊತೆಗೆ ಸಣ್ಣ ಮಕ್ಕಳಿಗಾಗಿ ತೊಟ್ಟಿಲಿನ ವ್ಯವಸ್ಥೆ ಮಾಡಬೇಕು ಹಾಗೂ ಸಾರ್ವಜನಿಕರ ದೂರಿಗೆ ಸ್ಪಂದಿಸದೆ ದರ್ಪ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.ಸಮಸ್ಯೆಗಳನ್ನು ಶೀಘ್ರ ಬಗೆಹರಿಸದಿದ್ದರೆ ಮಹಿಳೆಯರ ಸುರಕ್ಷತೆ ಮತ್ತು ಹಕ್ಕುಗಳಿಗಾಗಿ ಕರವೇ ಸ್ವಾಭಿಮಾನಿ ಬಣದ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಸಿದೆ.
ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಗೌರವಾಧ್ಯಕ್ಷ ಚಂದ್ರು,ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಮುರುಗೇಶ್,ಕುಶಾಲನಗರ ತಾಲೂಕು ಅಧ್ಯಕ್ಷ ಶಿವು ಹಾಗೂ ಶುಂಟಿಕೊಪ್ಪ ಹೋಬಳಿ ಅಧ್ಯಕ್ಷೆ ಭವ್ಯ ಉಪಸ್ಥಿತರಿದ್ದರು.
✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

