“ನೀಟ್ ಮರುಪರೀಕ್ಷೆ : ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಶ್ರದ್ಧಾಂಜಲಿ.”
1 min read
ಚಿಕ್ಕಮಗಳೂರು:ನೀಟ್ ಮರುಪರೀಕ್ಷೆಯ ಘೋಷಣೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದೇಶದ 21 ವಿದ್ಯಾರ್ಥಿಗಳಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಸಂಜೆ ನಗರದ ಆಜಾದ್ ವೃತ್ತದಲ್ಲಿ ಮೇಣದ ಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಮಾತನಾಡಿ, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿದ ಕೇಂದ್ರಸರ್ಕಾರಕ್ಕೆ ಧಿಕ್ಕಾರ ಎಂದು ಹೇಳಿದರು. ಮಕ್ಕಳನ್ನು ಕಳೆದುಕೊಂಡ ಕುಟುಂಬದ ನೋವಿನ ಶಾಪ ಸರ್ಕಾರಕ್ಕೆ ತಟ್ಟಲಿದೆ ಎಂದರು.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ದರೆ ಕೇಂದ್ರಸರ್ಕಾರ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ ಅವರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಮಾತನಾಡಿ, ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡುವ ಮೂಲಕ ದೇಶದ ಅಮೂಲ್ಯ 21 ವಿದ್ಯಾರ್ಥಿಗಳ ಜೀವವನ್ನು ಕೇಂದ್ರಸರ್ಕಾರ ಬಲಿ ಪಡೆದುಕೊಂಡಿರುವುದು ಖಂಡನೀಯ ಎಂದರು. ಅವರಿಗೆ ಆತ್ಮಕ್ಕೆ ಶಾಂತಿ ಕೋರಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಮುಖಂಡ ಎಂ.ಎಲ್. ಮೂರ್ತಿ ಮಾತನಾಡಿ, ಪ್ರಶ್ನೆ ಪತ್ರಿಕೆಯ ಸೋರಿಕೆಯ ಬಗ್ಗೆ ಉತ್ತರಿಸಲು ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅದಕ್ಕೆ ಉತ್ತರ ನೀಡಲು ಸಾಮರ್ಥ್ಯವಿಲ್ಲದೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಂದಿದ್ದಾರೆ. ಇವರಿಗೆ ನಾಚಿಕೆ ಇಲ್ಲ. ಬಿಜೆಪಿಗರದು ಅಯೋಗ್ಯರ ಸಂತತಿ ಎಂದರು.
ಆತ್ಮರಾಮ, ಆನಂದರಾಮ ಎಂದು ಘೋಷಣೆಗಳನ್ನು ಕೂಗಿ ರಾಮ ಮಂದಿರ ನಿರ್ಮಾಣಕ್ಕೆ ಇಟ್ಟಿಗೆ ಸಂಗ್ರಹಿಸಿದ ಬಿಜೆಪಿಗರು ಈಗ “ಆತ್ಮರಾವಣ, ಆನಂದರಾವಣ” ಎನ್ನುವಂತಾಗಿದ್ದಾರೆ. ಬಿಜೆಪಿಯ ಆಡಳಿತಾವಧಿಯಲ್ಲಿ ಮನುಷ್ಯರನ್ನು ಮನುಷ್ಯರೇ ಕೊಂದು ತಿನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಈ ಸಂದರ್ಭದಲ್ಲಿ ಎ.ಡಿ.ಸಿ ಅಧ್ಯಕ್ಷ ಮಂಜೇಗೌಡ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಶಿವಾನಂದಸ್ವಾಮಿ, ಮಲ್ಲೇಶ್ ಸ್ವಾಮಿ, ಮುಖಂಡರಾದ ಬಾ. ವಿಜಯಕುಮಾರ್, ಎಂ.ಎಲ್. ಮೂರ್ತಿ, ಪ್ರವೀಣ್ ಬೆಟ್ಟಗೆರೆ, ಮಾಜಿ ಅಧ್ಯಕ್ಷ ನಯಾಜ್ ಅಹಮದ್ ಸೇರಿದಂತೆ ಹಲವರು ಇದ್ದರು.
✍🏻ಬರಹ ಕೃಪೆ.✍🏻

ರತ್ನ ನಾಗೇಶ್.
ಚಿಕ್ಕಮಗಳೂರು
ನ್ಯೂಸ್ ಬ್ಯೂರೋ,ಅವಿನ್ ಟಿವಿ.
🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.
ಸ್ಥಾನಿಕ ಸಂಪಾದಕರು.
ನ್ಯೂಸ್ ಬ್ಯೂರೋ,ಅವಿನ್ ಟಿವಿ.

